ಬೆಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿ ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ನಿಯಂತ್ರಿಸಿ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಆಗಾಗ ಮುಖ್ಯಮಂತ್ರಿಗಳಿಗೆ ಪಾಠಮಾಡಲು ನೀವು ಹೆಡ್ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ನಿಯಂತ್ರಿಸಿ.
ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ ಎಂದರೆ ಅಕ್ರಮ ದಾಸ್ತಾನು ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ ಪ್ರಧಾನಿಗಳೇ?
ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಮುಖ್ಯಮಂತ್ರಿಯವರು ನಿಮಗೇನಾದರೂ ತಿಳಿಸಿದ್ದಾರೆಯೇ ಪ್ರಧಾನಿಗಳೇ?
ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಪ್ರಧಾನಿಗಳೇ?
‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು ಮುಖ್ಯಮಂತ್ರಿಯವರು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ ಪ್ರಧಾನಿಗಳೇ . ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ?
ವರದಿ: ಸಿಸಿಲ್ ಸೋಮನ್