ದಾವಣಗೆರೆ: ಶಾಮನೂರು ಶಿವಶಂಕರಪ್ಪ ಮನೆತನದ 3 ಲಕ್ಷ ಉಚಿತ ಲಸಿಕಾ ಕಾರ್ಯಕ್ರಮಕ್ಕೆಚಾಲನೆ – ಡಿ.ಕೆ. ಶಿವಕುಮಾರ್.
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮನೆತನದವರು ಹಮ್ಮಿಕೊಂಡಿರುವ 3 ಲಕ್ಷ ಉಚಿತ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ತಮ್ಮ ಸಂಸ್ಥೆಯಿಂದ ಒಟ್ಟು 3 ಲಕ್ಷ ಲಸಿಕೆಗಳನ್ನು ಕಂಪೆನಿಗಳಿಂದ ನೇರವಾಗಿ ಖರೀದಿಸಿ, ಅದನ್ನು ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ. ತಮ್ಮ ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಶಿವಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ‘ಪಕ್ಷ ಈಗಾಗಲೇ ₹100 ಕೋಟಿಯನ್ನು ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಬಳಸುವ ಯೋಜನೆ ರೂಪಿಸಿದೆ. ಇದರ ಜತೆಗೆ ಹೆಚ್ಚುವರಿಯಾಗಿ ಸುಮಾರು 4 ಕೋಟಿ ರೂ. ಮೌಲ್ಯದ ವ್ಯಾಕ್ಸಿನ್ ಗಳನ್ನು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಕ್ಷೇತದ ಜನರಿಗೆ ನೀಡುತ್ತಿದ್ದಾರೆ’ ಎಂದು ಹೇಳಿದರು.
ಪಕ್ಷಾತೀತವಾಗಿ ಎಲ್ಲರೂ ಇದರ ಪ್ರಯೋಜನ ಪಡೆದುಕೊಂಡು ಕೊರೋನಾ ಹಿಮ್ಮೆಟ್ಟಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇದೇ ವೇಳೆ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದ ಶಿವಕುಮಾರ್ ಅವರು, ‘ಬಿಜೆಪಿ ಸರ್ಕಾರದಿಂದ ಜನರಿಗೆ ಅವಶ್ಯಕತೆ ಇರುವಷ್ಟು ಲಸಿಕೆಗಳನ್ನು ಪೂರೈಸಲಾಗುತ್ತಿಲ್ಲ. ಇದರಿಂದ ನಮ್ಮ ರಾಜ್ಯದಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ’ ಎಂದು ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕೆಪಿಸಿಸಿಯ ಮಾಜಿ ಕಾರ್ಯಾಧ್ಯಕ್ಷ ಭೀಮಣ್ಣ ಖಂಡ್ರೆ, ಹಾಲಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಶಾಸಕರಾದ ಎಸ್. ರಾಮಪ್ಪ, ಡಾ. ವೈ.ರಾಮಪ್ಪ, ಪರಮೇಶ್ವರ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಕೆ.ಸಿ.ಕೊಂಡಯ್ಯ ಮುಂತಾದವರು ಹಾಜರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.